ಗೃಹಲಕ್ಷ್ಮೀ ಯೋಜನೆಯಲ್ಲಿ ದುಡ್ಡು ಪಡೆದರೆಕ್ರಿಮಿನಲ್ ಕೇಸ್ – ಲಕ್ಷ್ಮೀ ಹೆಬ್ಬಾಳಕರ್

Share the Post Now

ಬೆಳಗಾವಿ :ಗೃಹಲಕ್ಷ್ಮೀ ಯೋಜನೆಯಲ್ಲಿ ದುಡ್ಡು ಪಡೆದರೆ, ಅಸಡ್ಡೆ ತೋರಿದರೆ ಕ್ರಿಮಿನಲ್ ಪ್ರಕರಣ – ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆಬೆಳಗಾವಿ: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ 3 ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂತವರ ಮೇಲೆ ಕ್ರಿಮಿನಲ್ ಪ್ರಕರಣವನ್ನು ಸಹ ದಾಖಲಿಸಲಾಗುವುದು ಎಂದು ಹೇಳಿದರು.
ಗೃಹ ಲಕ್ಷ್ಮೀ ಯೋಜನೆಯನ್ನು ಮಹಿಳೆಯರು ಉಚಿತವಾಗಿ ಮಾಡಿಸಿಕೊಳ್ಳಬೇಕೆಂದು ಬಹಳಷ್ಟು ಕಷ್ಟಪಟ್ಟು ಜಾರಿ ಮಾಡಿದ್ದೇವೆ. ಇದರಲ್ಲೂ ದುಡ್ಡು ಪಡೆಯುತ್ತಿರುವುದು ಗಮನಕ್ಕೆ ಬಂದರೆ ಅಂತವರ ಲಾಗಿನ್ ಐಡಿ ಮತ್ತು ಪಾಸವರ್ಡ್ ವಾಪಸ್ ಪಡೆಯಲು ಸೂಚನೆ ಕೊಡಲಾಗಿದೆ. ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ತಹಸಿಲ್ದಾರ್, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರಿಗೇ ಆಗಲಿ ಹಣಪಡೆಯುವುದು ಗಮನಕ್ಕೆ ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು. ಅಸಡ್ಡೆ ಮಾಡಿದರೆ ಅವರೂ ಜವಾಬ್ದಾರರಾಗುತ್ತಾರೆ ಎಂದೂ ಸಚಿವರು ತಿಳಿಸಿದರು.
ನಾವು ಯಾರಿಂದಲೂ ಉಚಿತವಾಗಿ ಮಾಡಿಸಿಕೊಳ್ಳುತ್ತಿಲ್ಲ. ಅಪ್ ಲೋಡ್ ಮಾಡುವವರಿಗೆ ಸರಕಾರದಿಂದಲೇ ಪ್ರತಿ ಅರ್ಜಿಗೆ 12 ರೂ. ನೀಡಲಾಗುತ್ತಿದೆ. 10 ರೂ. ಅಪ್ ಲೋಡ್ ಮಾಡಲು, 2 ರೂ. ಪ್ರಿಂಟ್ ಔಟ್ ಕೊಡಲು ನೀಡಲಾಗುತ್ತಿದೆ. ಹಾಗಾಗಿ ಜನರು ಯಾರಿಗೂ ದುಡ್ಡು ಕೊಡಬೇಕಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.ರಾಜ್ಯ ಸರಕಾರ ಉರುಳಿಸಲು ಸಿಂಗಾಪುರದಲ್ಲಿ ತಂತ್ರ ರೂಪಿಸಲಾಗುತ್ತಿದೆ ಎನ್ನುವ ಸುದ್ದಿಯ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, ನಾನು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುವುದರಲ್ಲಿ, ಕೆಡಿಪಿ ಮೀಟಿಂಗ್ ನಲ್ಲಿ ಮತ್ತು ಜನರನ್ನು ಭೇಟಿಯಾಗುವುದರಲ್ಲಿ ಬೀಸಿಯಾಗಿದ್ದೇನೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ ಅವರು ನಮ್ಮ ಅಧ್ಯಕ್ಷರು, ಅವರಿಗೆ ಎಲ್ಲ ಮಾಹಿತಿ ಇರುತ್ತದೆ. ಅದರ ಆಧಾರದ ಮೇಲೆ ಅವರು ಪ್ರತಿಕ್ರಿಯಿಸಿರಬಹುದು ಎಂದು ತಿಳಿಸಿದರು.

Leave a Comment

Your email address will not be published. Required fields are marked *

error: Content is protected !!